ಹಾಸನ, ಮೇ 02: ಸಕಲೇಶಪುರ ತಾಲ್ಲೂಕಿನ ಬೈಕೆರೆ ಗ್ರಾಮದಲ್ಲಿ ಏಪ್ರಿಲ್ 25 ರಂದು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದ ಷಣ್ಮುಖ (35) ಅವರ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಕಾಡಾನೆ ದಾಳಿ ನಡೆಸಿ ಷಣ್ಮುಖ ಅವರನ್ನು ಕೊಂದಿತ್ತು. ಈ ಘಟನೆಯ ನಂತರ ಜನಾಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಇಂದು ಸಚಿವರು ಮೃತನ ನಿವಾಸಕ್ಕೆ ಭೇಟಿ ನೀಡಿದರು.

ಈ ವೇಳೆ, ಷಣ್ಮುಖ ಅವರ ಪತ್ನಿ ಲತಾ ಹಾಗೂ ತಾಯಿ ಕಣ್ಣೀರಿಟ್ಟರು. ಕುಟುಂಬಸ್ಥರು ಲತಾ ಅವರಿಗೆ ಕೆಲಸ ಮತ್ತು ಷಣ್ಮುಖನ ಮಗನ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ನೆರವು ನೀಡುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು.
ಸಚಿವ ಈಶ್ವರ್ ಖಂಡ್ರೆ, ಷಣ್ಮುಖ ಅವರ ಕುಟುಂಬಕ್ಕೆ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಶ್ರೇಯಸ್ ಪಟೇಲ್, ಸ್ಥಳೀಯ ಶಾಸಕ ಸಿಮೆಂಟ್ ಮಂಜು ಮತ್ತು ಸಿಸಿಎಫ್ ಏಡುಕುಂಡಲ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾಡಾನೆ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಸಚಿವರಿಗೆ ಒತ್ತಾಯಿಸಿದರು.