ಬೇಲೂರು, ಮಾರ್ಚ್ 14: ಹಳೇ ಕಟ್ಟಡದ ಸಜ್ಜಾ ಕುಸಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ (45) ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಆರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿನ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮಾರ್ಚ್ 9ರಂದು ಬೇಲೂರು ಪಟ್ಟಣದಲ್ಲಿ ಸಾರಿಗೆ ಬಸ್ ನಿಲ್ದಾಣದ ಎದುರು ಈ ದುರಂತ ಸಂಭವಿಸಿತ್ತು. ಹಳೇ ಕಟ್ಟಡದ ಸಜ್ಜಾ ಕುಸಿದು ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದರು, ಜ್ಯೋತಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಜ್ಯೋತಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದು, ಕೆಲವು ತಿಂಗಳ ಹಿಂದೆಯೇ ಅವರ ಪತಿ ಗೋಪಿ ಸಹ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ಜ್ಯೋತಿ ಕೂಡಾ ಅಗಲಿರುವುದರಿಂದ ಅವರ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ.