ಹಾಸನ: ಮಾಜಿ ಎಂಎಲ್‌ಸಿ ಪಟೇಲ್ ಶಿವರಾಂ ವಿಧಿವಶ

ಹಾಸನ, ಜನವರಿ 16:(kannadapost.in) ಜಿಲ್ಲೆಯ ಪ್ರಮುಖ ಜೆಡಿಎಸ್ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅಪೆಕ್ಸ್ ಬ್ಯಾಂಕ್ ಹಾಲಿ ನಿರ್ದೇಶಕ ಪಟೇಲ್ ಶಿವರಾಂ (75) ಇಂದು  ನಗರದ ತಮ್ಮ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಪಟೇಲ್ ಶಿವರಾಂ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2010ರಿಂದ 2016ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆಪ್ತರಾಗಿದ್ದರು. ಅವರು ಎಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕ ಮತ್ತು ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಸುಮಾರು ನಾಲ್ಕು ದಶಕಗಳಿಂದ ಜೆಡಿಎಸ್ ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದು, ಹಾಸನದ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅವರು ಪತ್ನಿ, ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಜೆಡಿಎಸ್ ನಾಯಕರು ಹಾಗೂ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.