ಹಾಸನ: ಸಂಸದ ಶ್ರೇಯಸ್ ಎಂ.ಪಟೇಲ್ ಇಂದು ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ, ಹಾಸನ ಜಿಲ್ಲೆಯ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಸಲ್ಲಿಸಿದರು.
ಕೆಲ ದಿನಗಳ ಹಿಂದೆ ನಿರಂತರವಾಗಿ ಸುರಿದ ಅಕಾಲಿಕ ಮಳೆಯ ಪರಿಣಾಮವಾಗಿ ಹಾಸನ ಜಿಲ್ಲೆಯ ಅರಕಲಗೂಡು, ಹೊಳೆನರಸೀಪುರ, ಹಳ್ಳಿ ಮೈಸೂರು ಸೇರಿದಂತೆ ವಿವಿಧೆಡೆ ತಂಬಾಕು ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ ಎಂಬುದನ್ನು ಸಂಸದರು ಸಚಿವರ ಗಮನಕ್ಕೆ ತಂದರು.
ಈ ನಿಟ್ಟಿನಲ್ಲಿ, ತಂಬಾಕು ಬೆಳೆಗೆ ಎಫ್ಆರ್ಪಿ ಮತ್ತು ಎಫ್ಸಿವಿ ಒದಗಿಸುವಂತೆ, ಪಾರದರ್ಶಕ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುವಂತೆ, ಉತ್ತಮ ಎಕ್ಸ್ ಗ್ರೇಷಿಯಾ ಪಾವತಿ ವ್ಯವಸ್ಥೆ ಜಾರಿಗೊಳಿಸುವಂತೆ ಮತ್ತು ಬದಲಿ ಬೆಳೆಗಳನ್ನು ಬೆಳೆಯಲು ರೈತರನ್ನು ಉತ್ತೇಜಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.