ಕಾಫಿತೋಟ ಕಾರ್ಮಿಕರಿದ್ದ ಜೀಪ್ ಪಲ್ಟಿ – ಓರ್ವ ಸಾವು, ಏಳು ಮಂದಿಗೆ ಗಾಯ

ಬೇಲೂರು; ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಶನಿವಾರ ಕಾರ್ಮಿಕರನ್ನು ಸಾಗಿಸುತ್ತಿದ್ದ ಹಳೇ ಜೀಪ್ ಪಲ್ಟಿಯಾದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಚಿಕ್ಕ ಮಕ್ಕಳು ಸೇರಿ ಏಳು ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಅಸ್ಸಾಂ ಮೂಲದ 29 ವರ್ಷದ ಆಲಿ ಎಂದು ಗುರುತಿಸಲಾಗಿದೆ.

ಘಟನೆ ವಿವರ:
ಯೋಗೇಶ್‌ಗೌಡ ಎಂಬುವವರ ತೋಟದಲ್ಲಿ ಕಾಫಿ ಕೊಯ್ಲು ಕೆಲಸ ಮುಗಿಸಿಕೊಂಡು ಜೀಪ್‌ನಲ್ಲಿ ಮನೆಗೆ ತೆರಳುತ್ತಿದ್ದ ಬಡ ಕೂಲಿ ಕಾರ್ಮಿಕರು ಈ ಅಪಘಾತಕ್ಕೆ ಒಳಗಾಗಿದ್ದಾರೆ.

MYC 8203 ನಂಬರ್‌ನ ಹಳೆಯ ಜೀಪ್ ಎದುರಿನಿಂದ ಬಂದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಆಯ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿ ಜಖಂಗೊಂಡಿದೆ.

ಗಾಯಾಳುಗಳಿಗೆ ಚಿಕಿತ್ಸೆ:
ಗಾಯಾಳುಗಳನ್ನು ಬೇಲೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರಿಂದ ತನಿಖೆ:
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.